ಕುಶಾಲನಗರ, ಜು 24: ನೀಟ್ ಪರೀಕ್ಷೆಯ ಅಕ್ರಮದ ವಿರುದ್ದ ಹೋರಾಟ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ನಡೆಯಿತು.
ನೀಟ್ ನ ಪ್ರಶ್ನೆಪತ್ರಿಕೆಯ ನಿರಂತರ ಸೋರಿಕೆಯ ಅಕ್ರಮದ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ಅಗ್ರಹಿಸಿ ಆಂದೋಲನ ನಿರತ ವಿದ್ಯಾರ್ಥಿ ಹಾಗೂ ಪೋಷಕರ ವಿರುದ್ದ ಪೈಶಾಚಿಕ ದಾಳಿ ನಡೆಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು ನರೇಂದ್ರ ಮೋದಿ, ಅಮಿತ್ ಶಾ ವಿರುದ್ದ ಧಿಕ್ಕಾರ ಕೂಗಿ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಬಂಧನಕ್ಕೆ ಒಳಪಡಿಸಿರುವ ವಿದ್ಯಾರ್ಥಿಗಳ ಬಿಡುಗಡೆಗೆ ಆಗ್ರಹಿಸಿ ಮತ್ತು ಅವರ ಮೇಲೆ ಹೂಡಿರುವ ಮೊಕದ್ದಮೆಗಳನ್ನು ಕೈಬಿಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಲಾಯಿತು.
ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನದ ಬಳಿಯಿಂದ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ರಥಬೀದಿ ಮೂಲಕ ಹಳೆ ಮಾರುಕಟ್ಟೆ ರಸ್ತೆ, ಟೌನ್ ಕಾಲೋನಿ ಮೂಲಕ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಆಗಮಿಸಿತು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ,
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಎನ್ಎಸ್ ಯುಐ ನ ಬಸವರಾಜು, ಮುಖಂಡರಾದ ನಾಪಂಡ ಮುತ್ತಪ್ಪ, ನಟೇಶ್ ಗೌಡ ಸೇರಿದಂತೆ ವಿವಿಧ ಘಟಕ, ಸಮಿತಿಗಳ ಪದಾಧಿಕಾರಿಗಳು, ಮಾಜಿ ಜನಪ್ರತಿನಿಧಿಗಳು, ಕಾರ್ಯಕರ್ತರು ಇದ್ದರು.
Back to top button
error: Content is protected !!