ಕಾಮಗಾರಿ

ಗುಂಡಿ ಬಿದ್ದ ರಸ್ತೆ ಕಾಂಕ್ರೀಟೀಕರಣಕ್ಕೆ ಭೂಮಿಪೂಜೆ

ಕುಶಾಲನಗರ, ಸೆ 08:ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಳುಗೋಡಿನಿಂದ ರಂಗಸಮುದ್ರ ಗ್ರಾಮ ಗಡಿವರೆಗೆ ರೂ 2.50 ಕೋಟಿ ವೆಚ್ಚದಲ್ಲಿ ಹೆದ್ದಾರಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಿಎಂಐಡಿಪಿ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿ 91 ರಲ್ಲಿ ಕೈಗೊಂಡಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಆರಂಭಿಸಿ ಮುಕ್ತಾಯಗೊಳಿಸಲು ಶಾಸಕರು ಅಭಿಯಂತರರು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ,
ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶಾಸಕರು ಬಿಡುವಿಲ್ಲದೆ ಸಂಚರಿಸುತ್ತಿದ್ದಾರೆ. ದೂರದೃಷ್ಟಿಯ ಯೋಜನೆಗಳನ್ನು ಹೊಂದಿದ್ದಾರೆ.
ಕ್ಷೇತ್ರಕ್ಕೆ ನೂತನ‌ ಶಾಸಕರಾದರೂ ಕೂಡ ಅಲ್ಪ ಅವಧಿಯಲ್ಲಿ ಕ್ಷೇತ್ರಕ್ಕೆ ಭರಪೂರ ಅನುದಾನ‌ ತಂದು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಕೀರ್ತಿ‌ ಮಂತರ್ ಗೌಡ ಅವರದ್ದಾಗಿ ಎಂದು ತಿಳಿಸಿದರು.

ಸ್ಥಳೀಯ ಮುಖಂಡ ನಂಗಾರು ಜಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯಲ್ಲಿ ಶಾಸಕರ ಮೂಲಕ ನಡೆದ ಅಭಿವೃದ್ಧಿ ಕಾಮಗಾರಿ, ಯೋಜನೆಗಳ‌ ಬಗ್ಗೆ ವಿವರ ನೀಡಿದರು.

ಇದೇ ಸಂದರ್ಭ ಸ್ಥಳೀಯರು ತಮ್ಮ‌ ಸಮಸ್ಯೆ, ಅಹವಾಲುಗಳನ್ನು ಶಾಸಕರಿಗೆ ಸಲ್ಲಿಸಿದರು.

ಈ ಸಂದರ್ಭ ಪ್ರಮುಖರಾದ ಚಂದ್ರಶೇಖರ್, ಸುನಿತಾ ಮಂಜುನಾಥ್,‌‌ ಲೋಕೋಪಯೋಗಿ ಇಲಾಖೆ ಅಭಿಯಂತರ ಅರ್ಬಾಜ್ ಅಹಮ್ಮದ್, ಗುಡ್ಡೆಹೊಸೂರು ಗ್ರಾಪಂ ಪಿಡಿಒ ಸುಮೇಶ್ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!