ಸಭೆ
ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ವಿಕಲಚೇತರ ಗ್ರಾಮ ಸಭೆ

ಕುಶಾಲನಗರ ಫೆ 26: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿಕಲಚೇತರ ಗ್ರಾಮ ಸಭೆಯು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಧ್ಯಕ್ಷ ಭಾಸ್ಕರ್ ನಾಯಕ್, ವಿಕಲ ಚೇತನರಿಗೆ ಗ್ರಾಮ ಪಂಚಾಯತಿ ವತಿಯಿಂದ ಅವರ ಬೇಡಿಕೆಯ ಅನುಗುಣವಾಗಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಗ್ರಾಮ ಪಂಚಾಯತಿ ಅನುದಾನದ ಶೇಕಡಾ 5 ರ ಅನುದಾನದಲ್ಲಿ ಬೀದಿ ದೀಪಗಳು, ದೂರವಿರುವ ಮನೆಗಳಿಗೆ ಮನೆಯ ಸಮೀಪದಲ್ಲೇ ಸೋಲಾರ್ ವಿದ್ಯುತ್ ದೀಪ ಅಳವಡಿಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಕಾರದ ಯೋಜನೆಯ ಅನುಗುಣವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿಕಲಚೇತನರಿಗೆ ಹಂತ ಹಂತವಾಗಿ ಯೋಜನೆಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸರಕಾರ ಯೋಜನೆಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಸದಸ್ಯ ಮಂಜು, ಸೋಮವಾರಪೇಟೆ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹರೀಶ್ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರ್ಯಕರ್ತೆ ಗೀತಾಂಜಲಿ ಸೇರಿದಂತೆ ಪಂಚಾಯತಿ ವ್ಯಾಪ್ತಿಯ ವಿಕಲಚೇತನರು ಹಾಜರಿದ್ದು, ತಮ್ಮ ಬೇಡಿಕೆಗಳನ್ನು ಮನವಿಯ ಮೂಲಕ ಸಲ್ಲಿಸಿದರು.



