ಮನವಿ

ಜಿಲ್ಲಾಧಿಕಾರಿಗಳಿಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮೂಲಕ ಮನವಿ ಸಲ್ಲಿಕೆ

ಮಡಿಕೇರಿ, ಆ 25:ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಕುರಿತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ ಮತ್ತು ನದಿ ತಟಗಳ ಅಭಿವೃದ್ಧಿ ಹಾಗೂ ನದಿ ತಟಗಳಲ್ಲಿ ಅಕ್ರಮವಾಗಿ ಆಗಿರುವ ಒತ್ತುವರಿ ತೆರವುಗೊಳಿಸಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರದ ಮೂಲಕ ಯೋಜನೆ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮೂಲಕ ಮನವಿ ಸಲ್ಲಿಸಿ ಚರ್ಚಿಸಲಾಯಿತು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮಾರ್ಗದರ್ಶಕರಾದ ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮತ್ತು ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಚಂದ್ರಮೋಹನ್ ಎಂ ಎನ್ ಮತ್ತಿತರರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಅದಕ್ಕೆ ಪ್ರಮುಖ ಕಾರಣಗಳು ಮತ್ತು ಆಗಬೇಕಾದ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು.
ನದಿ ತಟಗಳು ಅಕ್ರಮವಾಗಿ ಒತ್ತುವರಿ ಆಗುವುದರೊಂದಿಗೆ ಅಕ್ರಮವಾಗಿ ವಾಣಿಜ್ಯ ಚಟುವಟಿಕೆಗಳು ನಡೆಯಲು ಆರಂಭಗೊಂಡಿವೆ. ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ನೇರವಾಗಿ ನದಿ ಪಾಲಾಗುತ್ತಿವೆ. ಈ ಮೂಲಕ ನದಿ ನೀರಿನ ಗುಣಮಟ್ಟ ಸಂಪೂರ್ಣ ಕ್ಷೀಣಗೊಳ್ಳುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದು, ಈ ಬಗ್ಗೆ ಕಾರ್ಯಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಲಾಯಿತು.
ಮಡಿಕೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಲಕಾವೇರಿ ಭಾಗಮಂಡಲ ಬೆಂಗೂರು, ಕುಂದಚೇರಿ ನಾಪೋಕ್ಲು ಬಲ್ಲಮಾವಟಿ, ಹೊದ್ದೂರು, ಮೂರ್ನಾಡು ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಸ್ವಚ್ಛ ಕುಡಿಯುವ ನೀರಿನ ಘಟಕ ಸ್ಥಾಪನೆ ಕಸ ವಿಲೇವಾರಿಗೆ ವಿಶೇಷ ವಾಹನ ಸೌಲಭ್ಯ ಹಾಗೂ ನಾಪೋಕ್ಲು ವ್ಯಾಪ್ತಿಯಲ್ಲಿ ನದಿ ತಟದಲ್ಲಿ ತಡೆಗೋಡೆ ನಿರ್ಮಾಣ ಅಲ್ಲದೆ ತೀರದಲ್ಲಿರುವ ಸಾವಿರಕ್ಕೂ ಅಧಿಕ ಮನೆಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಜಿಲ್ಲಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ವಿರಾಜಪೇಟೆ ತಾಲೂಕು ವ್ಯಾಪ್ತಿಯ ಕಾಕೋಟುಪರಂಬು, ಬೇತ್ರಿ ಹಾಲುಗುಂದ ಕನ್ನಂಗಾಲ ಸಿದ್ದಾಪುರ ನೆಲ್ಲಿಹುದಿಕೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾವೇರಿ ನದಿ ತಟಗಳಲ್ಲಿರುವ ನೂರಾರು ಮನೆಗಳನ್ನು ಸ್ಥಳಾಂತರಿಸಿ ಶಾಶ್ವತ ಪುನರ್ವಸತಿ ಕಲ್ಪಿಸುವುದು ಮತ್ತು ನದಿ ತಟವನ್ನು ಅಭಿವೃದ್ಧಿಗೊಳಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಕುಶಾಲನಗರ ತಾಲೂಕು ವ್ಯಾಪ್ತಿಯ ನೆಲ್ಲಿಹುದಿಕೇರಿಯಿಂದ ಶಿರಂಗಾಲ ತನಕ ಹಲವು ಗ್ರಾಮಗಳು ಮತ್ತು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಪ್ರವಾಸಿ ಕೇಂದ್ರಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳು ನೇರವಾಗಿ ನದಿ ಒಡಲು ಸೇರುತ್ತಿದೆ. ಪ್ರವಾಸಿಗರು ಒಯ್ಯುವ ಪ್ಲಾಸ್ಟಿಕ್ ಬಾಟಲಿಗಳು ಅರಣ್ಯ ಮತ್ತು ಜಲಮೂಲಗಳನ್ನು ಹಾನಿಗೊಳಿಸುತ್ತಿವೆ. ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಅರಿವು ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದೆ. ಖಾಸಗಿ ಸಂಸ್ಥೆಗಳ ಲಾಭಾಂಶದ ಸಿ ಎಸ್ ಆರ್ ಫಂಡ್ ಬಳಸಿ ಪ್ರವಾಸಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಕುಶಾಲನಗರ ಪಟ್ಟಣದ ಬಹುತೇಕ ಬಡಾವಣೆಗಳು ಮಳೆಗಾಲ ಅವಧಿಯಲ್ಲಿ ಜಲಾವೃತಗೊಂಡು ಜನಜೀವನ ಏರುಪೇರಾಗುತ್ತಿದೆ.
ಈ ಹಿನ್ನಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ನದಿಗೆ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಗ್ರಾಮ ಪಟ್ಟಣಗಳಲ್ಲಿನದಿ ತಟಗಳ ವ್ಯಾಪ್ತಿಯಲ್ಲಿ ಮಾಂಸದ ಅಂಗಡಿಗಳಿಗೆ ಪರವಾನಿಗೆ ನೀಡದಂತೆ ಎಚ್ಚರವಹಿಸುವುದು. ಕಾವೇರಿ ನದಿ ತಟಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ನಿಯಮಬಾಹಿರ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಿ ಅಭಿವೃದ್ಧಿಗೊಳಿಸುವ ಕಾರ್ಯ ಯೋಜನೆ ರೂಪಿಸುವಂತೆ ಹಾಗೂ ಕುಶಾಲನಗರ ಪಟ್ಟಣದ ಒಳಚರಂಡಿ ಕಾಮಗಾರಿ ವಿಳಂಬದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದು ,ತಕ್ಷಣ ಯೋಜನೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದು.
ಕಾವೇರಿ ನದಿ ಬಫರ್ ಜೋನ್ ಬಗ್ಗೆ ಸರ್ವೆ ಕಾರ್ಯ ನಡೆಸಿ ನದಿ ಜಲಮೂಲಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭ ಪ್ರತಿಕ್ರಿಯೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಶೀಘ್ರದಲ್ಲಿಯೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ವನಿತಾ ಚಂದ್ರಮೋಹನ್, ಕೊಕ್ಕಲೆರ ಧರಣಿ, ಪ್ರದೀಪ್ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!