ಕುಶಾಲನಗರ ಅ.10: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಾಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸರ್ಕಾರಿ ಜಾಗ ಮಂಜೂರುಗೊಳಿಸಿರುವ ಜಾಗದ ಮಂಜೂರಾತಿ ಪತ್ರವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಸೋಮವಾರ ಮಡಿಕೇರಿ ನಗರದಲ್ಲಿ ವಿತರಿಸಿದರು.
ಮಡಿಕೇರಿ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ.ಸಭೆಯಲ್ಲಿ ಜಿಲ್ಲಾಡಳಿತದ ವತಿಯಿಂದ ವಿವಿಧ ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ಜಾಗ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದ ಸಚಿವರು, ಶಾಲೆಗಳ ಮುಖ್ಯಸ್ಥರು ಶಾಲೆಗಳ ಆಸ್ತಿಯನ್ನು ಸಂರಕ್ಷಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಅವರು ಹೆಚ್ಚಿನ ಕಾಳಜಿ ವಹಿಸಿ ಸರ್ಕಾರಿ ಶಾಲೆಗಳಿಗೆ ಜಾಗ ಮಂಜೂರಾತಿಗೊಳಿಸಿದ್ದಾರೆ ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದರು.
ಇದೀಗ ಜಿಲ್ಲೆಯ 48 ಸರ್ಕಾರಿ ಶಾಲೆಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಲು ಕ್ರಮವಹಿಸಲಾಗಿದೆ ಎಂದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ಜಿ.ಪಂ.ಸಿಇಓ ಭನ್ವರ್ ಸಿಂಗ್ ಮೀನಾ ಇತರರು ಇದ್ದರು.
ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳು ಸರ್ಕಾರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಈತನಕ ಜಾಗ ಮಂಜೂರಾತಿ ಪತ್ರ ಹಾಗೂ ಹಕ್ಕುಪತ್ರ ವಿತರಣೆಯಾಗಿರಲಿಲ್ಲ. ಇದೀಗ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ ಸತೀಶ್ ಅವರ ನಿರ್ದೇಶನದಂತೆ ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಜಾಗ ಮಂಜೂರಾತಿಗೆ ಸಂಬಂಧಿಸಿದಂತೆ ಕೈಗೊಂಡ ಅಭಿಯಾನದಿಂದ ಇದೀಗ ಸರ್ಕಾರಿ ಶಾಲೆಗಳಿಗೆ ಮಂಜೂರಾತಿ ಪತ್ರ ಲಭಿಸಿದೆ. ನಂತರ ತಾಲ್ಲೂಕು ಹಂತದಲ್ಲಿ ಸಂಬಂಧಿಸಿದ ಸರ್ಕಾರಿ ಶಾಲೆಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.
Back to top button
error: Content is protected !!