ಪ್ರತಿಭಟನೆ
ಹಕ್ಕುಪತ್ರ ಒದಗಿಸಲು ಆಗ್ರಹಿಸಿ ಸುಂದರನಗರ ನಿವಾಸಿಗಳಿಂದ ಪ್ರತಿಭಟನೆ

ಕುಶಾಲನಗರ, ಫೆ 10: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆ ಭಾಗದಲ್ಲಿ ನೆಲೆಕಂಡಿರುವ ಹಲವು ಕುಟುಂಬಗಳು ಹಕ್ಕುಪತ್ರದಿಂದ ವಂಚಿತರಾಗಿರುವ ಹಿನ್ನೆಲೆಯಲ್ಲಿ ಸೌಲಭ್ಯ ವಂಚಿತ ನಿವಾಸಿಗಳು ಹಕ್ಕುಪತ್ರಕ್ಕೆ ಒತ್ತಾಯಿಸಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.
ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಜಿಲ್ಲಾಧ್ಯಕ್ಷ ಎಲ್.ಎಂ.ನಾಗರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹಕ್ಕುಪತ್ರ ವಂಚಿತರು ಪ್ರವಾಸಿ ಮಂದಿರ ಬಳಿಯಿಂದ ಮೆರವಣಿಗೆಯಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಧಾವಿಸಿ ಘೋಷಣೆಗಳನ್ನು ಕೂಗಿದರು. ಬಳಿಕ ಅಲ್ಲಿಂದ ತಹಸೀಲ್ದಾರ್ ಕಛೇರಿಗೆ ತೆರಳಿ ಕಛೇರಿ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದರು. ಕೂಡಲೆ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳುವಂತೆ ವಿನಂತಿಸಿ ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಅವರ ಮೂಲಕ ಜಿಲ್ಲಾಧಿಕಾರಿ ಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.




